ಪೊಲೀಸ್ ಧ್ವಜ ದಿನಾಚರಣೆ

ಮಡಿಕೇರಿ ಏ.02:-ಕೊಡಗು ಜಿಲ್ಲಾ ಪೊಲೀಸ್ ವಿಭಾಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣಾ ಕಾರ್ಯಕ್ರಮವು ಶನಿವಾರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು.
ನಿವೃತ್ತ ಮಹಿಳಾ ಎಎಸ್ಐ ಮೇರಿ ಇಮಾಕ್ಯುಲೇಟ್.ಎ ಅವರು ಪಥಸಂಚಲನ ಪರಿವೀಕ್ಷಣೆ ಮಾಡಿ ಗೌರವ ವಂದನೆ ಸ್ವೀಕರಿಸಿದ ನಂತರ ಮಾತನಾಡಿ ಪೊಲೀಸ್ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳು ಮತ್ತು ಅಧೀನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರಬೇಕು. ನಿಷ್ಠೆ, ಬದ್ಧತೆ, ಪ್ರಾಮಾಣಿಕತೆ ಇದ್ದಲ್ಲಿ ಉತ್ತಮ ಸೇವೆ ಸಲ್ಲಿಸಬಹುದು ಎಂದು ಅವರು ಹೇಳಿದರು.
ಪೊಲೀಸರು ಪ್ರತಿನಿತ್ಯ ಉತ್ತಮ ಸಾರ್ವಜನಿಕ ಸಂಪರ್ಕ ಇಟ್ಟುಕೊಂಡು ಕೆಲಸ ನಿರ್ವಹಿಸಬೇಕು. ಸಾರ್ವಜನಿಕ ಸೇವೆಯೇ ಪ್ರಮುಖ ಎಂಬುದನ್ನು ಅರಿತುಕೊಂಡು ಕಾರ್ಯನಿರ್ವಹಿಸಬೇಕು. ಶಿಸ್ತಿನ ಇಲಾಖೆಯಲ್ಲಿ ಆದಷ್ಟು ಮುಂಜಾಗೃತೆ ವಹಿಸಿ ತಪ್ಪು ಆಗದಂತೆ ನೋಡಿಕೊಳ್ಳುವುದು ಅಗತ್ಯ ಎಂದು ಅವರು ಸಲಹೆ ಮಾಡಿದರು.
ಪೊಲೀಸ್ ಇಲಾಖೆ ಸಾರ್ವಜನಿಕರ ರಕ್ಷಣೆ, ಕಾನೂನು ಸುವ್ಯವಸ್ಥೆ ಪಾಲನೆಯ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಬಂದಿದೆ. ಸೇವೆಗೆ ಸೇರಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒತ್ತಡದಿಂದ ಕಾರ್ಯನಿರ್ವಹಿಸಬೇಕಾಗಿರುತ್ತದೆ. ಇದರಿಂದ ಆರೋಗ್ಯ ಸಮಸ್ಯೆಗಳಿಗೆ ಬೇಗನೆ ಒಳಗಾಗುವ ಸಂಭವವಿರುತ್ತದೆ. ಆ ನಿಟ್ಟಿನಲ್ಲಿ ಪ್ರತಿ ವರ್ಷ ಪೊಲೀಸ್ ಇಲಾಖೆಯಿಂದ ನಡೆಸುವ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಸಲಹೆ ಮಾಡಿದರು.
ಏರ್ ಮಾರ್ಷಲ್ (ನಿವೃತ್ತ) ಕೆ.ಸಿ.ಕಾರ್ಯಪ್ಪ ಅವರು ಡಿಸಿಆರ್ಬಿ ವಿಭಾಗದಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಂ.ಎನ್.ನಿರಂಜನ್ ಅವರಿಗೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಿಸಿ ಮಾತನಾಡಿ ಪೊಲೀಸ್ ಇಲಾಖೆಯ ಸೇವೆ ಶ್ಲಾಘನೀಯ. ಆ ನಿಟ್ಟಿನಲ್ಲಿ ಸಮಾಜ ಮುಖಿಯಾಗಿ ಪೊಲೀಸರು ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು. ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ನಡೆದ ಪಥ ಸಂಚಲನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಅವರು ಸ್ವಾಗತಿಸಿ ಮಾತನಾಡಿ ಪೊಲೀಸರ ಸೇವೆ, ಶೌರ್ಯ, ಅರ್ಪಣಾ ಮನೋಭಾವವನ್ನು ಗೌರವಿಸುವ ಹಾಗೂ ಪುರಸ್ಕರಿಸುವ ನಿಟ್ಟಿನಲ್ಲಿ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಅವರು ಹೇಳಿದರು.
ಪೊಲೀಸರು ಜನಸೇವೆಗೆ ಅರ್ಪಣಾ ಮನೋಭಾವದಿಂದ ದುಡಿಯುತ್ತಾರೆ. ಶಿಸ್ತು ಕರ್ತವ್ಯ ನಿಷ್ಠೆ ಕಾಣಬಹುದಾಗಿದೆ. ಪೊಲೀಸರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಅವರು ಹೇಳಿದರು.
ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮತ್ತಿತರವನ್ನು ಕಲ್ಪಿಸಲಾಗುತ್ತದೆ ಎಂದು ಅವರು ಹೇಳಿದರು.
ಉತ್ತಮ ಸೇವೆ ಸಲ್ಲಿಸಿದ ಪೊಲೀಸರನ್ನು ಸನ್ಮಾನಿಸಲಾಯಿತು. ಆರ್ಪಿಐ ಚೆನ್ನನಾಯಕ್ ಅವರು ಪಥಸಂಚಲನದ ನೇತೃತ್ವ ವಹಿಸಿದ್ದರು. ನಿವೃತ್ತ ಡಿಸಿಪಿ ಪೂಣಚ್ಚ, ನಿವೃತ್ತ ಪೊಲೀಸ್ ಅಧೀಕ್ಷಕರಾದ ಎ.ಕೆ.ಸುರೇಶ್, ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ಗಜೇಂದ್ರ ಪ್ರಸಾದ, ಜಯಕುಮಾರ, ಶೈಲೇಂದ್ರ, ನಿವೃತ್ತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಇತರರು ಇದ್ದರು. ಆಂಟೋನಿ ಡಿಸೋಜ ನಿರೂಪಿಸಿದರು. ನಿವೃತ್ತ ಪೊಲೀಸ್ ಅಧೀಕ್ಷಕರಾದ ಅಪ್ಪಯ್ಯ ವಂದಿಸಿದರು.