ರಾಷ್ಟ್ರೀಯ ಹೆದ್ದಾರಿ; ರಿಟೈನಿಂಗ್ ವಾಲ್ ನಿರ್ಮಾಣ ಸಂಬಂಧ ಸ್ಥಳ ಪರಿಶೀಲನೆ

ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಉಂಟಾಗಬಹುದಾದ ಗುಡ್ಡ ಕುಸಿತವನ್ನು ತಪ್ಪಿಸುವ ನಿಟ್ಟಿನಲ್ಲಿ ರಾಷ್ರ್ಟೀಯ ಹೆದ್ದಾರಿ-275ರ ಸಂಪಾಜೆ ರಸ್ತೆಯಲ್ಲಿ ಸುಮಾರು 22 ಕಡೆ ರಿಟೈನಿಂಗ್ ವಾಲ್ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಈ ಸ್ಥಳಗಳನ್ನು ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಕೆ.ಜಿ.ಬೋಪಯ್ಯ, ಸುನೀಲ್ ಸುಬ್ರಮಣಿ, ರಾಷ್ಟ್ರೀಯ ಹೆದ್ದಾರಿ ಕರ್ನಾಟಕ ವಿಭಾಗದ ಮುಖ್ಯ ಎಂಜಿನಿಯರ್ ವಿಜಯ ಕುಮಾರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಶುಕ್ರವಾರ ಪರಿಶೀಲನೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು ಕಳೆದ ಮೂರು ವರ್ಷದಿಂದ ಸುರಿದ ಭಾರಿ ಮಳೆಯಿಂದ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಭೂ ಕುಸಿತ ಸಂಭವಿಸಿ ಅಪಾರ ಹಾನಿ ಸಂಭವಿಸಿದ್ದು, ಹಾಗೂ ರಾಷ್ಟ್ರೀಯ ಹೆದ್ದಾರಿ 275ರ ಮಡಿಕೇರಿಯಿಂದ ಸಂಪಾಜೆವರೆಗಿನ ಕೆಲವು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿ ರಸ್ತೆ ಸಂಪರ್ಕ ಕಡಿತಗೊಂಡು ಅನೇಕ ಸಮಸ್ಯೆಗಳು ಉಂಟಾಗಿತ್ತು. ಈ ಸಂಬಂಧ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಭೂಕುಸಿತವಾಗುವ ಸ್ಥಳಗಳಲ್ಲಿ ರಿಟೈನಿಂಗ್ ವಾಲ್ಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಈಗಾಗಲೇ 59 ಕೋಟಿ ರೂ. ವೆಚ್ಚದಲ್ಲಿ 18 ಕಡೆಗಳಲ್ಲಿ ರಿಟೈನಿಂಗ್ ವಾಲ್ಗಳನ್ನು ನಿರ್ಮಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಸಂಸದರಾದ ಪ್ರತಾಪ್ ಸಿಂಹ ಅವರು ತಿಳಿಸಿದರು.
ಪ್ರಸಕ್ತ ಸಾಲಿನಲ್ಲಿ ಜೂನ್ ಮಾಹೆಯಲ್ಲಿ ಸುರಿದ ಮಳೆಗೆ ಮತ್ತೆ ಕೆಲವು ಕಡೆ ಭೂಕುಸಿತವಾಗಿದ್ದು, ಈ ಸಂಬಂಧ ಅಗತ್ಯವಿರುವ ಕಡೆ ರಿಟೈನಿಂಗ್ ವಾಲ್ ನಿರ್ಮಿಸಲು ಜಾಗ ಗುರುತಿಸಲಾಗಿದ್ದು, ಈ 22 ಕಡೆಗಳಲ್ಲಿ ರಿಟೈನಿಂಗ್ ವಾಲ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವ ಸಂಬಂಧ ರಾಷ್ಟ್ರೀಯ ಹೆದ್ದಾರಿಯ ಕರ್ನಾಟಕ ವಿಭಾಗದ ಮುಖ್ಯ ಎಂಜಿನಿಯರ್ ವಿಜಯ ಕುಮಾರ್ ಅವರ ಜೊತೆ ಸ್ಥಳ ಪರಿಶೀಲನೆ ನಡೆಸಲಾಗಿದೆ ಎಂದರು.
ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಕಳೆದ ಮೂರು ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಅನೇಕ ಕಡೆಗಳಲ್ಲಿ ಭೂಕುಸಿತವಾಗಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಿಟೈನಿಂಗ್ ವಾಲ್ಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದರು.